ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಮಿಷನ್ ರಾಜಕೀಯ ಆರಂಭಗೊಂಡಿದೆ. ಅಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಪಡೆದ ಆರೋಪ ಮಾಡಿತ್ತು. ಪೇಸಿಎಂ ಅಭಿಯಾನ ಕೂಡ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(H.D. Kumaraswamy) 60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸಂಟೇಜ್ ಕಮಿಷನ್ ಇದೆ ಎಂದು ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು, ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪ್ರತಿ ಇಲಾಖೆಗಳಲ್ಲೂ ಸಚಿವರಿಗೆ ಮೊದಲು ಕಮಿಷನ್ ಕೊಟ್ಟು ಆ ಬಳಿಕ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ಇನ್ನೂ ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ಗರಂ ಆಗಿರುವ ಕಾಂಗ್ರೆಸ್ ನಾಯಕರು, ಕುಮಾರಸ್ವಾಮಿ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ಪ್ರತಿಕ್ರಿಯಿಸಿ, ಕುಮಾರಸ್ವಾಮಿ ತಾವು ಮಾಡಿದ ಆರೋಪವನ್ನ ಸಾಬೀತುಪಡಿಸಿ ಎಂದು ಸವಾಲೆಸೆದಿದ್ದಾರೆ.

