
ಗಂಗಾವತಿ: ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಶುಕ್ರವಾರ ಜರುಗಿತು.
ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ ಅವರು ಮಾತನಾಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ಆಗಮಿಸಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಭವನೀಯ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತಿಳಿದುಕೊಳ್ಳಬೇಕು ಎಂದರು.
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕೃತಿ ವಿಕೋಪದಿಂದ ಆಗುವ ಅನಾಹುತ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ ಸೇರಿದಂತೆ ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದ ಆಗುವ ಅನಾಹುತಗಳು ಮತ್ತು ಇನ್ನಿತರ ಅನಾಹುತಗಳಿಂದ ಸಾರ್ವಜನಿಕರು ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಎನ್ಡಿಆರ್ಎಫ್ ತಂಡದ ಸದಸ್ಯರಾದ ವಜ್ರಚೇತನ ಅವರು ಮಾಹಿತಿ ನೀಡಿದರು. ಎನ್ಡಿಆರ್ಎಫ್ ತಂಡದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಅಣಕು ಪ್ರದರ್ಶನ ನೀಡಿ ಅರಿವು ಮೂಡಿಸಿದರು.
ಚಿಕ್ಕಜಂತಕಲ್ ಗ್ರಾಪಂ ಅಧ್ಯಕರಾದ ಶ್ರೀಮತಿ ನೇತ್ರಾವತಿ ಯಂಕೋಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
