ಮಂಗಳೂರು: ರೈಲ್ವೇ ನೇಮಕಾತಿ ಮಂಡಳಿ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಈ ವಿಚಾರವನ್ನು ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಚಿವರ ಗಮನಕ್ಕೆ ತಂದಿದ್ದರು.
ಈ ಬಗ್ಗೆ ಸೂಚನೆ ನೀಡಿರುವ ವಿ.ಸೋಮಣ್ಣ ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
ಧಾರ್ಮಿಕ ಸ್ವಾತಂತ್ರ್ಯ ಎಲ್ಲರಿಗೂ ಒಂದೇ ಆಗಿರುವುದರಿಂದ ಕೇವಲ ಜನಿವಾರ ಮತ್ತು ಮಂಗಳಸೂತ್ರಕ್ಕೆ ಮಾತ್ರವಲ್ಲ ಎಲ್ಲ ಧರ್ಮಿಯರ ಧಾರ್ಮಿಕ ಸಂಕೇತಗಳಿಗೂ ಅವಕಾಶ ನೀಡಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ.

